ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿ ಬೆಂಗಳೂರಿನಲ್ಲಿ ನಡೆಯುತ್ತಿದೆ.
ಪವರ್ ಸ್ಟಾರ್ ಆಗಿ ಮಿಂಚಿ ಸೈಮಾ ಪ್ರಶಸ್ತಿಯ ಸಮಾರಂಭಗಳಲ್ಲಿ ಎಲ್ಲರ ಮನ ಗೆದ್ದಿರುವ ಪುನೀತ್ ರಾಜ್ಕುಮಾರ್ ಅವರ ಸ್ಮರಣೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (ಸೈಮಾ), ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಈ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾಗಿದ್ದು, ಈಗ ‘ಸೈಮಾ-2022’ರ ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಸೈಮಾ ಪ್ರಶಸ್ತಿ ನೀಡುವ ಸಂಸ್ಥೆಯ ಮುಖ್ಯಸ್ಥೆ ಬೃಂದಾ ಪ್ರಕಾಶ್, ತೆಲುಗು ಚಿತ್ರರಂಗದ ಸ್ಟಾರ್ ನಟ ರಾಣ ದಗ್ಗುಬಾಟಿ, ಕನ್ನಡದ ಜನಪ್ರಿಯ ನಟ ಡಾಲಿ ಧನಂಜಯ್, ನಟಿ ಶಾನ್ವಿ ಶ್ರೀವಾತ್ಸವ್, ಶ್ರೀಲೀಲಾ ಮೊದಲಾದವರು ಸ್ಟಾರ್ ಹೊಟೇಲ್ ನಲ್ಲಿ ಜಗಮಗಿಸುವ ವೇದಿಕೆಯಲ್ಲಿ ಈ ವಿಷಯ ಪ್ರಕಟಿಸಿದರು.
ಹತ್ತನೇ ವರ್ಷದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನಲ್ಲಿ ನಡೆಸಲು ಹರ್ಷವಾಗುತ್ತಿದೆ. ಇಲ್ಲಿ ಈ ಸಮಾರಂಭ ನಡೆಸಲು ಎರಡು ಪ್ರಮುಖ ಕಾರಣಗಳಿವೆ. ಒಂದು ನಮ್ಮೆಲ್ಲರ ನೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವುದು; ಮತ್ತೊಂದು ಕನ್ನಡ ಚಿತ್ರಗಳು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಹಾಗಾಗಿ ಈ ಬಾರಿ ಬೆಂಗಳೂರನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು ಬೃಂದಾ ಪ್ರಸಾದ್.
ಒಂದು ಪ್ರಶಸ್ತಿ ಸಮಾರಂಭವನ್ನು ಹತ್ತುವರ್ಷಗಳ ಕಾಲ ನಡೆಸುವುದು ಸುಲಭವಲ್ಲ. ಆ ನಿಟ್ಟಿನಲ್ಲಿ ನಾನು ಮೊದಲು ಇದರ ಉಸ್ತುವಾರಿ ಬೃಂದಾ ಪ್ರಸಾದ್ ಮತ್ತು ತಂಡಕ್ಕೆ ಅಭಿನಂದನೆ ತಿಳಿಸುವೆ. ಈ ಬಾರಿ ಹತ್ತನೇ ವರ್ಷದ ಪ್ರಶಸ್ತಿ ಸಮಾರಂಭ ನನಗೆ ಪ್ರಿಯವಾದ ಬೆಂಗಳೂರಿನಲ್ಲಿ ನಡೆಯುತ್ತಿರುವುದು ಖುಷಿಯ ವಿಚಾರ ಎಂದವರು ಖ್ಯಾತ ನಟ ರಾಣಾ ದಗ್ಗುಬಾಟಿ.
ನನಗೆ ‘ಸೈಮಾ’ಬರೀ ಪ್ರಶಸ್ತಿ ಅಲ್ಲ; ಅದೊಂದು ನೆನಪು. ನಾನು ಮೊದಲ ಬಾರಿ ಈ ಪ್ರಶಸ್ತಿ ಸ್ವೀಕರಿಸಲು ಮಲೇಷಿಯಾಗೆ ಹೋಗಿದ್ದು ನನ್ನ ಹೃದಯದಲ್ಲಿ ಇನ್ನೂ ಹಚ್ಚ ಹಸಿರಾಗಿದೆ. ಈ ಬಾರಿ ನಮ್ಮ ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ನಡೆಯುತ್ತಿರುವುದು ಹೆಚ್ಚು ಖುಷಿ ತಂದಿದೆ. ನಿಮ್ಮೆಲ್ಲರಿಗೂ ನಮ್ಮೂರಿಗೆ ಆತ್ಮೀಯ ಸ್ವಾಗತ. ಪದೇಪದೇ ಬೆಂಗಳೂರಿನಲ್ಲೇ ಈ ಸಮಾರಂಭ ಮಾಡಬೇಕು ಅನಿಸಬೇಕು. ಆ ಮಟ್ಟದಲ್ಲಿ ಈ ಸಮಾರಂಭ ಯಶಸ್ವಿಯಾಗಲಿ ಎಂದು ನಟ ಡಾಲಿ ಧನಂಜಯ ಹಾರೈಸಿದರು.
ನಟಿರಾದ ಶಾನ್ವಿ ಶ್ರೀವಾಸ್ತವ್, ಫರಿಯಾ ಅಬ್ದುಲ್ಲಾ, ಶ್ರೀಲೀಲ ಹಾಗೂ ಕೆಲವು ಪ್ರಾಯೋಜಕರು ಸಹ ಸಮಾರಂಭದ ಬಗ್ಗೆ ಮಾತನಾಡಿದರು.