ಹಿರಿಯ ನಾಯಕ ನಟ ಸುಪ್ರೀಂಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಗೆ ಈಗ ಅವಕಾಶಗಳ ಸುರಿಮಳೆಯಾಗಿದೆ. ಈಚೆಗಷ್ಟೇ ತಮಿಳುನಾಡು ಮೂಲದ ನಿರ್ದೇಶಕರ ಜೊತೆ ಬಹು ಭಾಷಾ ಚಿತ್ರದಲ್ಲಿ ನಟಿಸುತ್ತಿರುವ ಅಕ್ಷಿತ್ ಗೆ ಮತ್ತೊಂದು ಅವಕಾಶ ಹುಡುಕಿಕೊಂಡು ಬಂದಿದೆ.
ಬಳ್ಳಾರಿ ದರ್ಬಾರ್ ಖ್ಯಾತಿಯ ಸ್ಮೈಲ್ ಶ್ರೀನು ಅವರ ನಿರ್ದೇಶನದ ಮುಂದಿನ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ ಅಕ್ಷಿತ್. ಈ ಹಿಂದೆ ತೂಫಾನ್, ಬಳ್ಳಾರಿ ದರ್ಬಾರ್ ಹಾಗೂ 18 ಟು 25 ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಸ್ಮೈಲ್ಶ್ರೀನು ಈಗ ಮತ್ತೊಂದು ವಿಭಿನ್ನ ಪ್ರೇಮಕಥೆಯನ್ನು ತೆರೆಮೇಲೆ ತರಲು ಹೊರಟಿದ್ದಾರೆ. ಆ ಚಿತ್ರಕ್ಕೆ ‘ಓ ಮೈ ಲವ್’ ಎಂಬ ಎಂದು ಹೆಸರಿಡಲಾಗಿದೆ. ರೊಮ್ಯಾಂಟಿಕ್ ಜಾನರ್ ಕಥಾನಕ ಹೊಂದಿರುವ ಈ ಚಿತ್ರದಲ್ಲಿ ಹದಿಹರೆಯದ ವಯಸಿನಲ್ಲಿ ಯುವ ಹೃದಯಗಳ ಮನದಲ್ಲಿ ಉಂಟಾಗುವ ತಳಮಳ, ಪ್ರೀತಿ, ಪ್ರೇಮದ ಕುರಿತಾಗಿ ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ನಿರ್ದೇಶಕ ಸ್ಮೈಲ್ಶ್ರೀನು ಅವರು ರೆಗ್ಯುಲರ್ ಜಾನರ್ ಬಿಟ್ಟು ಬೇರೆ ರೀತಿಯ ನಿರೂಪಣೆಯನ್ನು ಮಾಡುವ ಪ್ರಯತ್ನದಲ್ಲಿದ್ದಾರೆ.
ಜಿಸಿಬಿ ರಾಮಾಂಜಿನಿ ಅವರು ಈ ಚಿತ್ರದ ಕಥೆ ಬರೆಯುವುದರೊಂದಿಗೆ ಜಿಸಿಬಿ ಪ್ರೊಡಕ್ಷನ್ಸ್ ಮೂಲಕ ಚಿತ್ರ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೇ ರಚಿಸಿದ್ದಾರೆ. ರೊಮ್ಯಾಂಟಿಕ್ ಲವ್ಸ್ಟೋರಿ ಜೊತೆಗೆ ಫ್ಯಾಮಿಲಿ ಎಲಿಮೆಂಟ್ ಹಾಗೂ ಹಾಸ್ಯದ ಮಿಳಿತವಾಗಿ ಈ ಚಿತ್ರ ಮೂಡಿಬರಲಿದ್ದು ಒಂದು ಪ್ರೇಮಕಥೆಯನ್ನು ಹೀಗೂ ಹೇಳಬಹುದು ಎಂದು ನಿರ್ದೇಶಕ ಶ್ರೀನು ಈ ಚಿತ್ರದ ಮೂಲಕ ತೋರಿಸಿಕೊಡುತ್ತಿದ್ದಾರೆ.
ಬಿಗ್ಬಜೆಟ್ ಮೂಲಕ ತಯಾರಾಗಲಿರುವ ಈ ಚಿತ್ರದ ಮೇಕಿಂಗ್, ಸಾಂಗ್, ತಾರಾಗಣ ಎಲ್ಲದರಲ್ಲೂ ಅದ್ದೂರಿತನ ಎದ್ದು ಕಾಣುತ್ತದೆ. ಅಲ್ಲದೆ ಈ ಚಿತ್ರದಲ್ಲಿ ಅಕ್ಷಿತ್ ಶಶಿಕುಮಾರ್ ಜೊತೆ ನಾಯಕಿಯಾಗಿ ಕೀರ್ತಿ ಕಲಕೇರಿ ಅಭಿನಯಿಸುತ್ತಿದ್ದಾರೆ.
ಸಾಧು ಕೋಕಿಲಾ, ದೀಪಿಕಾ ಆರಾಧ್ಯ ಸೇರಿದಂತೆ ಇತರರೂ ಈ ಚಿತ್ರದಲ್ಲಿರುತ್ತಾರೆ. ಡಾ.ವಿ.ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ಚರಣ್ ಅರ್ಜುನ್ ಅವರ ಸಂಗೀತ, ರಿಯಲ್ ಸತೀಶ್ ಅವರ ಸಾಹಸ ನಿರ್ದೇಶನ, ಆಕಾಶ್ಕುಮಾರ್ ಚವನ್ ಅವರ ಸಹನಿರ್ದೇಶನ ಈ ಚಿತ್ರಕ್ಕಿರಲಿದೆ. ಬೆಂಗಳೂರು, ಮಂಗಳೂರು, ಮಡಿಕೇರಿ, ಹೈದರಾಬಾದ್ ಸೇರಿದಂತೆ ಕರ್ನಾಟಕದ ಸುಂದರ ತಾಣಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯಲಿದೆ.