ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವು ರಾಜ್ಯೋತ್ಸವದ ದಿನವಾದ ನವೆಂಬರ್ ಒಂದರಂದು ನಡೆಯುತ್ತಿದೆ.
ಮಂಗಳವಾರ ನಾಲ್ಕು ಗಂಟೆಗೆ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯುವ ಸಮಾರಂಭದಲ್ಲಿ ಭಾರತೀಯ ಚಿತ್ರರಂಗದ ಮೇರುನಟ ರಜನಿಕಾಂತ್, ತೆಲುಗು ಸೂಪರ್ ಸ್ಟಾರ್ ಜೂನಿಯರ್ ಎನ್.ಟಿ.ಆರ್ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರ ಸಂಪುಟದ ಸಹೋದ್ಯೋಗಿಗಳಾದ ಆರ್.ಅಶೋಕ್, ಸುನೀಲ್ ಕುಮಾರ್, ಸುಧಾ ಮೂರ್ತಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲಾದವರ ಉಪಸ್ಥಿತಿಯಲ್ಲಿ ಈ ಅದ್ದೂರಿ ಕಾರ್ಯಕ್ರಮ ನಡೆಯುತ್ತಿದೆ.
ಅಭಿಮಾನಿ ದೇವರುಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಈ ಸಂದರ್ಭದಲ್ಲಿ ತಮ್ಮ ಆರಾಧ್ಯ ದೈವ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡುವ ಪ್ರಶಸ್ತಿಯನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಈಚೆಗೆ ‘ಗಂಧದಗುಡಿ’ ಚಿತ್ರ ಹಾಗೂ ವಾರ್ಷಿಕ ಪುಣ್ಯ ಸ್ಮರಣೆ ಸಂದರ್ಭದಲ್ಲಿ ಅಪ್ಪು ಆದರ್ಶಗಳನ್ನು ನೆನೆದಿರುವ ಅಭಿಮಾನಿಗಳಿಗೆ ಇದೂ ವಿಶೇಷ ಸಂದರ್ಭವಾಗಲಿದೆ.